ಬೆಂಗಳೂರು, ಎಪ್ರಿಲ್ 13, 2025 (ಕರಾವಳಿ ಟೈಮ್ಸ್) : ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕೇಂದ್ರ ಸರಕಾರವೇ ಕಾರಣ. ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಇಡೀ ದೇಶದಲ್ಲಿ ಬೆಲೆ ಏರಿಕೆಯಾಗಿದೆ. ಬಿಜೆಪಿ ನಾಯಕರಿಗೆ ಜನಾಕ್ರೋಶ ಯಾತ್ರೆ ಮಾಡುವ ಯಾವ ನೈತಿಕತೆಯು ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾಡಿದ ಅವರು, ರಾಜ್ಯ ಸರಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ ಹೋಗುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕಚ್ಚಾ ತೈಲದ ಬೆಲೆಯ ಮೇಲೆ ನಿಗದಿಯಾಗುತ್ತದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಒಂದು ಬ್ಯಾರಲ್ ಕಚ್ಚಾತೈಲಕ್ಕೆ 120 ಡಾಲರ್ ಇತ್ತು, ಈಗ 65 ಡಾಲರ್ ಗೆ ಇಳಿದಿದೆ. ಅಂದು ಗ್ಯಾಸ್ ಸಿಲಿಂಡರ್ ಬೆಲೆ 400 ರೂಪಾಯಿ ಇತ್ತು, ಇಂದು 800 ರೂಪಾಯಿ ಮೀರಿದೆ. ಪೆಟ್ರೋಲ್-ಡೀಸೆಲ್ ಬೆಲೆಯನ್ನು ಕೇಂದ್ರ ಸರಕಾರ ಹೆಚ್ಚಿಸಿರುವ ಬಗ್ಗೆ ಜನರು ಪ್ರಶ್ನೆ ಕೇಳಬೇಕಿದೆ ಎಂದರು.
ಸರಕಾರ ಆರ್ಥಿಕ ದಿವಾಳಿಯಾಗಿದೆ ಎಂಬ ಬಿಜೆಪಿಯವರ ಆರೋಪ ಅವರಿಗೇ ನಾಚಿಕೆಗೇಡಿನದು. ಬಿಜೆಪಿಯವರ ಕಾಲದಲ್ಲಿ ಅನುದಾನವಿಲ್ಲದಿದ್ದರೂ ಕಾಮಗಾರಿಗಳಿಗೆ ಮಂಜೂರಾತಿ ನೀಡಿ, ಟೆಂಡರ್ ಪ್ರಕ್ರಿಯೆ ಕೈಗೊಂಡಿದ್ದರು. ಈಗ ನಮಗೆ ಪಾಠ ಹೇಳುತ್ತಿದ್ದಾರೆ ಎಂದ ಸಿಎಂ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರ ಸರಕಾರದ ಅವಧಿಯಲ್ಲಿಯೇ ರಾಜ್ಯದ ಆರ್ಥಿಕತೆ ಕುಸಿದಿತ್ತು. ನಮ್ಮ ಅವಧಿಯಲ್ಲಿ ಹಿಂದಿನ ವರ್ಷಕ್ಕಿಂತ ಈ ಸಾಲಿನ ಬಜೆಟ್ ಪ್ರಮಾಣ ಸುಮಾರು 38 ಸಾವಿರ ಕೋಟಿಯಷ್ಟು ಹೆಚ್ಚಾಗಿದೆ. ಇದು ಸರಕಾರವೊಂದರ ಆರ್ಥಿಕ ದಿವಾಳಿತನವೇ ಎಂದು ಪ್ರಶ್ನಿಸಿದರು.
ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಮುಂಚೆ ದೇಶದ ಮೇಲೆ 53,11,000 ಕೋಟಿ ಸಾಲವಿತ್ತು. ಆದರೆ ಈಗ 200 ಲಕ್ಷ ಕೋಟಿಗೂ ಹೆಚ್ಚಾಗಿದೆ. ದೇಶದ ಸಾಲ ನಾಲ್ಕು ಪಟ್ಟು ಹೆಚ್ಚಲು ನರೇಂದ್ರ ಮೋದಿಯವರೇ ಕಾರಣ ಅಲ್ವಾ ಎಂದು ಪ್ರಶ್ನೆ ಮಾಡಿದ ಸಿದ್ದರಾಮಯ್ಯ ಅವರು, ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿ, ವಿರೋಧ ಪಕ್ಷದ ನಾಯಕರಾಗಿಯೂ ಅಸಮರ್ಥರಾಗಿದ್ದರು. ಕಾಂಗ್ರೆಸ್ ಪಕ್ಷಕ್ಕೆ ವಲಸೆ ಬಂದಾಗ ಬಿಜೆಪಿಯವರ ವಿರುದ್ಧವೇ ಹಲವು ಹೇಳಿಕೆಗಳನ್ನು ನೀಡಿದ್ದರು. ಜಾತಿಗಣತಿ ಜಾರಿಗೆ ತರಬೇಕೆಂಬುದು ಕಾಂಗ್ರೆಸ್ ನ ಭರವಸೆಯಾಗಿದೆ. ಒಂದು ಕುಟುಂಬದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಪರಿಸ್ಥಿತಿಯ ಬಗ್ಗೆ ಮಾಹಿತಿ ತಿಳಿಯುವುದು ಸರಕಾರವಾಗಿ ಅವಶ್ಯಕ. ಸ್ವಾತಂತ್ರ್ಯ ನಂತರ ಜಾತಿಗಣತಿ ನಡೆದಿಲ್ಲ, ಹಲವು ಸಂದರ್ಭಗಳಲ್ಲಿ ನ್ಯಾಯಾಲಯಗಳಲ್ಲಿ ಈ ಬಗ್ಗೆ ಮಾಹಿತಿ ಕೇಳಲಾಗಿತ್ತು. ಆದ್ದರಿಂದ ಜಾತಿಗಣತಿ ಮಾಡಬೇಕಾದ ಅನಿವಾರ್ಯತೆಯಿತ್ತು. ಜಾತಿ ಗಣತಿಯನ್ನು ಸಮರ್ಪಕವಾಗಿ ನಡೆಸಲಾಗಿಲ್ಲ ಎಂಬ ಬಿಜೆಪಿ ಆರೋಪ ರಾಜಕೀಯ ಲಾಭ ನಷ್ಟದ ಲೆಕ್ಕಾಚಾರದಿಂದ ಕೂಡಿದೆ. ಸಮೀಕ್ಷೆಯನ್ನು ಶೇ. 95 ರಷ್ಟು ನಿಖರವಾಗಿ ನಡೆಸಲಾಗಿದೆ. ಶೇ. 98 ರಷ್ಟು ನಿಖರವಾಗಿ ಗ್ರಾಮಾಂತರ ಹಾಗೂ ಶೇ. 96 ರಷ್ಟು ನಿಖರವಾಗಿ ನಗರ ಪ್ರದೇಶಗಳಲ್ಲಿ ನಡೆಸಲಾಗಿದೆ.
1,01,60,000 ಜನರು ಈ ಸಮೀಕ್ಷೆಯಲ್ಲಿ ಭಾಗಿಯಾಗಿದ್ದು, ಸುಮಾರು 1,36,000 ಜನ ಶಿಕ್ಷಕರಿದ್ದರು. ಶಿಕ್ಷಕರಲ್ಲಿ ಹೆಚ್ಚಿನವರು ಸಾಮಾನ್ಯ ವರ್ಗದವರೇ ಆಗಿದ್ದು, ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿದೆ. ಜಾತಿ ಗಣತಿಯ ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿದ ನಂತರವಷ್ಟೇ ವಿಧಾನಸಭೆಯಲ್ಲಿ ಮಂಡಿಸಲು ಸಾಧ್ಯ.
ಒಳಮೀಸಲಾತಿ ಜಾರಿಗೆ ತರಲು ಜಸ್ಟೀಸ್ ನಾಗಮೋಹನ್ ದಾಸ್ ಅವರ ಆಯೋಗ ರಚಿಸಿ, ಎರಡು ತಿಂಗಳಲ್ಲಿ ವರದಿ ನೀಡಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಆದಿ ದ್ರಾವಿಡ, ಆದಿ ಆಂದ್ರ, ಆದಿ ಕರ್ನಾಟಕ, ಎಸ್.ಸಿ ಗಳು ಸೇರಿದಂತೆ 102 ಜಾತಿಗಳಿವೆ. ಇವರಲ್ಲಿ ಯಾರು ಯಾವ ಜಾತಿಗೆ ಸೇರಿದ್ದಾರೆಂಬ ಬಗ್ಗೆ ಸ್ಪಷ್ಟತೆ ಸಿಗಬೇಕೆಂಬ ಕಾರಣಕ್ಕೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
ನಮ್ಮ ಸರಕಾರ ನವದೆಹಲಿಯಲ್ಲಿ ಕರ್ನಾಟಕ ಭವನವನ್ನು ನಿರ್ಮಿಸಿದೆ. ಅದೇ ರೀತಿ ಮಹಾರಾಷ್ಟ್ರ ಸರಕಾರದವರು ಬೆಳಗಾವಿಯಲ್ಲಿ ಭವನವನ್ನು ನಿರ್ಮಾಣ ಮಾಡುತ್ತಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ಇದಕ್ಕೆ ಅವಕಾಶವಿದೆ. ಆದರೂ ಮಹಾರಾಷ್ಟ್ರದವರು ನಮ್ಮ ಭೂಮಿಯನ್ನು ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
0 comments:
Post a Comment